ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಅನಂತಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ ಹೈಕೋರ್ಟ್

Spread the love

ದಾಬಸ್ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegde) ಪುತ್ರನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪುತ್ರ ಅಶುತೋಷ್ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ.

ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಮಾಜಿ ಸಂಸದ ಅನಂತಕುಮಾರ್ ಹೆಗಡೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶುತೋಷ್ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ ನೀಡಿ ಇಂದು (ಏಪ್ರಿಲ್ 16) ಆದೇಶ ಹೊರಡಿಸಿದೆ.

ದಾಬಸ್ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ನಲ್ಲಿ ಅಶುತೋಷ್ ಹೆಸರಿಲ್ಲದಿದ್ದರೂ ದೋಷಾರೋಪಪಟ್ಟಿಯಲ್ಲಿ ಸೇರಿಸಲಾಗಿದೆ. ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವುದರಿಂದ ಪಾಸ್‌ಪೋರ್ಟ್ಗೆ ಸಮಸ್ಯೆಯಾಗಲಿದೆ. ಕುಟುಂಬದ ಹಿರಿಯರನ್ನು ನೋಡಲು ವಿದೇಶದಿಂದ ಬಂದಿದ್ದಾಗ ಘಟನೆ ನಡೆದಿದೆ. ಘಟನೆಯಲ್ಲಿ ಅಶುತೋಷ್ ಪಾತ್ರವಿಲ್ಲವೆಂದು ವಕೀಲ ಪವನ್ ಚಂದ್ರ ಶೆಟ್ಟಿ ವಾದ ಮಂಡಿಸಿದರು. ಈ ವಾದ ಆಲಿಸಿದ ಹೈಕೋರ್ಟ್, ಅಶುತೋಷ್ ವಿರುದ್ಧದ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಇದರಿಂದ ಅನಂತಕುಮಾರ ಹೆಗಡೆ ಪುತ್ರ ಅಶುತೋಷ್ಗೆ ಮಧ್ಯಂತರ ರಿಲೀಫ್ ಸಿಕ್ಕಂತಾಗಿದೆ.

ಕೋರ್ಟ್ಗೆ ಅನಂತ್ ಕುಮಾರ್ ಹೆಗಡೆ ಮನವಿ ಮಾಡಿದ್ದೇನು.?

ತುಮಕೂರಿನ ದಾಬಸ್‌ಪೇಟೆ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಅನಂತಕುಮಾರ ಹೆಗಡೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌. ಸುನೀಲ್‌ ದತ್‌ ಯಾದವ್‌ ಏಕಸದಸ್ಯ ಪೀಠ ನಡೆಸಿತ್ತು. ವಿದೇಶದಿಂದ ಬಂದಿದ್ದ ಪುತ್ರ ಅಶುತೋಷ್‌, ತನ್ನ ಅಜ್ಜಿಯನ್ನು ಕಾಣಲು ತಂದೆ ಜೊತೆ ಯಲ್ಲಾಪುರಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅನ್ಯ ರಾಜ್ಯದ ಕಾರು ಅವರ ಕಾರು ಹಿಂದಿಕ್ಕಲು ಪ್ರಯತ್ನಿಸಿತ್ತು. ಒಮ್ಮೆ ಕಾರಿಗೂ ಡಿಕ್ಕಿ ಹೊಡೆದಿದೆ. ಈ ಹಿನ್ನೆಲೆಯಲ್ಲಿ ಅವರ ಅಂಗ ರಕ್ಷಕ ಮತ್ತು ಚಾಲಕ ದೂರುದಾರರ ಜೊತೆ ವಾಗ್ವಾದ ನಡೆಸಿದ್ದರು. ಇದರಲ್ಲಿ ಅನಂತಕುಮಾರ್ ಮತ್ತು ಅವರ ಪುತ್ರ ಅಶುತೋಷ್‌ ಪಾತ್ರ ಇಲ್ಲ ಎಂದು ಅನಂತಕುಮಾರ್ ಹೆಗಡೆ ಪರ ವಕೀಲರು ವಾದಿಸಿದರು.

ಕಾರಿನ ಹಿಂಬದಿ ಸೀಟಲ್ಲಿ ಅಶುತೋಷ್‌ ಕುಳಿತಿದ್ದರು. ಘಟನಾ ಸ್ಥಳಕ್ಕೆ ಅವರು ಬಂದಿಲ್ಲ. ಅವರ ಕಾರಿನ ಮಧ್ಯದ ಸೀಟುಗಳನ್ನು ತೆಗೆದರೆ ಮಾತ್ರ ಹಿಂದಿನ ಸೀಟಿನಲ್ಲಿರುವವರು ಇಳಿಯಲು ಸಾಧ್ಯ. ಹೀಗಿದ್ದರೂ, ತನಿಖೆ ಸಂದರ್ಭದಲ್ಲಿ ತನಿಖಾಧಿಕಾರಿ ಅಶುತೋಷ್‌ ಅವರನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಆರೋಪ ಪಟ್ಟಿಯಲ್ಲೂ ತಂದೆ-ಮಕ್ಕಳ ಪಾತ್ರದ ಬಗ್ಗೆ ಉಲ್ಲೇಖವಿಲ್ಲ. ಅಶುತೋಷ್‌ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದು, ಹಾಲಿ ಪ್ರಕರಣ ಅವರ ಪಾಸ್‌ಪೋರ್ಟ್‌ ಪಡೆಯುವುದಕ್ಕೆ ಅಡ್ಡಿಯಾಗಿದೆ. ಹೀಗಾಗಿ, ಅವರ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದ್ದರು. ಇದನ್ನು ಆಲಿಸಿದ ಹೈಕೋರ್ಟ, ವಿಚಾರಣೆಯನ್ನು ಇಂದಿಗೆ ಅಂದರೆ ಏಪ್ರಿಲ್ 16ಕ್ಕೆ ಮುಂದೂಡಿತ್ತು.

ಭಾರೀ ಸದ್ದು ಮಾಡಿದ ಅನಂತ ಕುಮಾರ್ ಹೆಗಡೆ ಮನವಿ

ಇನ್ನು ಅನಂತ ಕುಮಾರ ಹೆಗಡೆ ಕೋರ್ಟ್ಗೆ ಮಾಡಿದ್ದ ಮನವಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿತ್ತು.  ಪುತ್ರ ಅಶುತೋಷ್ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಹೀಗಾಗಿ ಪ್ರಕರಣದಿಂದ ಕೈಬಿಡಿ ಎಂದು ಕೋರ್ಟ್ಗೆ ಅನಂತ ಕುಮಾರ್ ಹೆಗಡೆ ಮನವಿ ಮಾಡಿದ್ದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ,  ವಬಡವರ ಮಕ್ಕಳು ಗಲಾಟೆಗೆ, ತಮ್ಮ ಮಕ್ಕಳು ವಿದೇಶ ವ್ಯಾಸಂಗಕ್ಕೆ, ಇದು ಬಿಜೆಪಿಯವರ ವರಸೆ. ತಮ್ಮ ಮಗನ ವಿದೇಶ ವ್ಯಾಸಂಗಕ್ಕಾಗಿ ಪಾಸ್ಪೋರ್ಟ್ ಪಡೆಯಲು ಗಲಾಟೆ ಕೇಸ್ ಅಡ್ಡಿಯಾಗುತ್ತಿದೆ ಎಂದು ಅವಲತ್ತುಕೊಂಡಿರುವ ಇದೇ ಬಿಜೆಪಿ ನಾಯಕ ಬಡವರ ಮಕ್ಕಳಿಗೆ ಗಲಾಟೆಗೆ, ದೊಂಬಿಗೆ ಪ್ರಚೋದನೆ ಕೊಡುವುದರಲ್ಲಿ ಎತ್ತಿದ ಕೈ ಎಂದು ಟಾಂಗ್ ಕೊಟ್ಟಿದ್ದರು.

ಏನಿದು ಪ್ರಕರಣ.?

ಕಳೆದ ವರ್ಷ ಅಂದರೆ 2025ರ ಜೂನ್ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ (Nelamangala) ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪ ಕೇಳಿಬಂದಿತ್ತು. ಅನಂತ್‌ ಕುಮಾರ್‌ ಹೆಗಡೆ ಅವರು ತೆರಳುತ್ತಿದ್ದ ಕಾರನ್ನು, ಓವರ್ ಟೇಕ್ ಮಾಡಲಾಯಿತು ಎಂಬ ಕಾರಣಕ್ಕೆ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ, ಅನಂತ್ ಕುಮಾರ್ ಹೆಗಡೆ ಪುತ್ರ ಅಶುತೋಷ್, ಚಾಲಕ ಹಾಗೂ ಗನ್ಮ್ಯಾನ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

WhatsApp Group Join Now

ಇನ್ನೋವಾ ಕಾರಿನಲ್ಲಿ ಸಲ್ಮಾನ್, ಸೈಫ್‌, ಇಲಿಯಾಜ್ ಖಾನ್‌ ಹಾಗೂ ಉನ್ನೀಸಾ ಎಂಬವರ ಮೇಲೆ ಹಲ್ಲೆ ಆರೋಪ ಕೇಳಿಬಂದಿತ್ತು. ಬಳಿಕ ಹಲ್ಲೆಗೊಳಗಾಗಿದ್ದ ಸೈಫ್ ನೀಡಿದ ದೂರಿನ ಮೇರೆಗೆ ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಅನಂತಕುಮಾರ್ ಹೆಗಡೆ A1, ಗನ್‌ಮ್ಯಾನ್ ಶ್ರೀಧರ್‌ A2, ಕಾರು ಚಾಲಕ ಮಹೇಶ್‌ A3 ಮತ್ತು ಇತರರ ವಿರುದ್ಧ ಬಿಎನ್ಎಸ್ ಕಾಯ್ದೆಯ 6 ಸೆಕ್ಷನ್‌ಗಳಡಿ ಎಫ್ಐಆರ್ ದಾಖಲಾಗಿತ್ತು.


Spread the love

Leave a Reply