ಹಿಂದೂ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ (32) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆ ನಡೆದಿದೆ.
ಮಂಗಳೂರಿನಲ್ಲಿ ನಡೆದಿದ್ದ ಸುಹಾಸ್ ಶೆಟ್ಟಿ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು ಮಾತ್ರವಲ್ಲ ರಾಜಕೀಯ ಸಂಘರ್ಷಕ್ಕೂ ಕಾರಣವಾಗಿತ್ತು. ಮೇ.11ರಂದು ಬಜ್ಪೆಯಲ್ಲಿ ಈ ಕೊಲೆ ನಡೆದಿತ್ತು. ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಎನ್ಐಎ ತನಿಖೆಗೆ ವಹಿಸಿ ಆದೇಶ ಹೊರಡಿಸಲಾಗಿದೆ.
ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು, ನಾಯಕರು ರಾಜ್ಯಾದ್ಯಂತ ಪಟ್ಟು ಹಿಡಿದು ಪ್ರತಿಭಟನೆ ಮಾಡಿದ್ದರು. ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು 11 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಎಂಬಲ್ಲಿ ಸುಹಾಸ್ ಶೆಟ್ಟಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ದುಷ್ಕರ್ಮಿಗಳು, ನಡುರಸ್ತೆಯಲ್ಲೇ ಕೊಚ್ಚಿ ಕೊಂದು ಹಾಕಿದ್ದರು. ಈ ಕೊಲೆಯ ವಿಡಿಯೋ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆಗಿತ್ತು.
ಬಜ್ಪೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಹತ್ಯೆ ಪ್ರಕರಣದಲ್ಲಿ ಮಂಗಳೂರು ನಗರ ಸಿಸಿಬಿ ಪೊಲೀಸರು ಇತ್ತೀಚೆಗೆ ಮತ್ತೋರ್ವ ಆರೋಪಿ ಬಜ್ಪೆ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ರಜಾಕ್ (59) ಎಂಬುವವನನ್ನು ಬಂಧಿಸಿದ್ದರು.